ವಾರ್ತೆ ವಿಶೇಷ ಲೇಖನ
ನಾಗರ ಪಂಚಮಿಯ ಬಂತೆಂದರೆ ಹಬ್ಬಗಳ ಹೆಬ್ಬಾಗಿಲು ತೆರೆದಂತೆ. ನಾಗರ ಪಂಚಮಿಯಿಂದ ಹಬ್ಬಗಳ ಸಾಲು ಆರಂಭಗೊಂಡಂತೆ. ನಾಗರ ಪಂಚಮಿಎಂದರೆ ನಾಡಿಗೆ ಹಬ್ಬ… ನಾಗರ ಪಂಚಮಿ ಹಿನ್ನಲೆಯಲ್ಲಿ ಪಸಿದ್ಧ ಕ್ಷೇತ್ರ ಸುಬ್ರಹ್ಮಣ್ಯನ ದರುಶನವನ್ನು ಮಾಡೋಣ…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಸುಪ್ರಸಿದ್ಧ ದೇವಾಲಯ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ. ಇಲ್ಲಿ ಈಶ್ವರ ಪುತ್ರ ಷಣ್ಮುಖ ದೇವರನ್ನು ನಾಗ ರೂಪದಲ್ಲಿ ಸುಬ್ರಹ್ಮಣ್ಯ ಎಂಬ ಹೆಸರಿನಿಂದ ಆರಾಧಿಸಲಾಗುತ್ತದೆ.ನಾಗಾರಾಧನೆ ಇಲ್ಲಿ ಅತ್ಯಂತ ಮಹತ್ವವನ್ನು ಪಡೆದುಕೊಂದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಪ್ರಾಕೃತಿಕ ಸೌಂದರ್ಯದ ಅದ್ಭುತ ರಮಣೀಯ ದೃಶ್ಯಗಳಿಂದ ಕೂಡಿದ ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿದೆ. ಇಲ್ಲಿಯ ಪಾವಿತ್ರ್ಯತೆಯು ಹಾಗೂ ದೇವ ಸಾನ್ನಿಧ್ಯವು ಅತೀ ವಿರಳ ಸ್ಥಳಗಳಲ್ಲಿ ಮಾತ್ರ ಕಾಣಬಹುದಾಗಿದ್ದು, ಹೆಮ್ಮೆ ಪಡುವಂತಾಗಿದೆ.
ಇಲ್ಲಿಯ ದೇವಸ್ಥಾನವು ಊರಿನ ಮಧ್ಯದಲ್ಲಿದ್ದು, ನದಿ-ಕಾಡು-ಪರ್ವತಗಳಿಂದ ಆವೃತವಾಗಿದ್ದು, ಪ್ರಕೃತಿಯ ಅಪ್ರತಿಮ ಸೌಂದರ್ಯಕ್ಕೆ ಭಾಷ್ಯದಂತಿದೆ. ಶ್ರೀ ಸುಬ್ರಹ್ಮಣ್ಯ ದೇವರು ಇಲ್ಲಿಯ ದೇವಳದ ಪ್ರಧಾನ ದೇವತೆ. ಮುಖ್ಯ ದ್ವಾರವು ಪೂರ್ವಾಭಿಮುಖವಾಗಿದೆ. ಭಕ್ತಾದಿಗಳು ಮುಖ್ಯ ಗೋಪುರವಿರುವ ಪಶ್ಚಿಮ ಬಾಗಿಲಿನಿಂದ ಪ್ರವೇಶಿಸಿ ಒಳಸುತ್ತನ್ನು ಪೂರ್ವ ಬಾಗಿಲಿನಿಂದ ಮುಂದುವರೆಸುತ್ತಾರೆ. ಗರ್ಭಗುಡಿಯ ಮಧ್ಯಭಾಗದಲ್ಲಿ ಶ್ರೀ ದೇವರ ಮೂರ್ತಿಯಿದೆ. ಅದರ ಮೇಲಿನ ಹಂತದಲ್ಲಿ ಶ್ರೀ ಸುಬ್ರಹ್ಮಣ್ಯ ಮೂರ್ತಿ ಮತ್ತು ವಾಸುಕಿ ಹಾಗೂ ಕೆಳ ಹಂತದಲ್ಲಿ ಆದಿಶೇಷನ ಮೂರ್ತಿಗಳಿವೆ. ಭಕ್ತಾದಿಗಳು ಒಳ ಸುತ್ತನ್ನು ಪ್ರವೇಶಿಸುವಾಗ ತಮ್ಮ ಶರ್ಟ್, ಬನಿಯಾನುಗಳನ್ನು ತೆಗೆಯಬೇಕಾಗುವುದು.
ಕುಕ್ಕೆ ಸುಬ್ರಹ್ಮಣ್ಯ ನಾಗಗಳ ವಾಸಸ್ಥಾನವಾಗಿದೆ. ಇಲ್ಲಿ ಶ್ರೀ ಸುಬ್ರಹ್ಮಣ್ಯನಿಗೆ ಸಲ್ಲಿಸಿದ ಪೂಜೆಯು ಸರ್ಪರಾಜನಾದ ವಾಸುಕಿಗೆ ಸಲ್ಲುವುದು. ಹಾಗಾಗಿ ಈ ಸ್ಥಳವು ಎಲ್ಲಾ ತರಹದ ನಾಗದೋಷಗಳ ಪರಿಹಾರ ಸ್ಥಳವಾಗಿ ನಂಬಲಾಗಿದೆ. ದೇಶದ ಮೂಲೆ ಮೂಲೆಗಳಿಂದ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಹಾಗೂ ಇತರ ಪೂಜಾದಿಗಳನ್ನು ಸಲ್ಲಿಸಲು ಭಕ್ತಾದಿಗಳು ಬರುತ್ತಿರುತ್ತಾರೆ.
ಶ್ರೀ ಕ್ಷೇತ್ರವು ಕುಮಾರಧಾರ ನದಿ ತೀರದಲ್ಲಿದೆ. ದುಷ್ಟ ರಾಕ್ಷಸರ ದಮನಕ್ಕಾಗಿ ಜನ್ಮವೆತ್ತಿದ ಕುಮಾರಸ್ವಾಮಿಯು ತಾರಕಾದಿ ಅಸುರರನ್ನು ಯುದ್ಧದಲ್ಲಿ ಸಂಹರಿಸಿ, ಸೋದರ ಗಣಪತಿಯ ಜೊತೆ ಕುಮಾರಪರ್ವತಕ್ಕೆ ಬಂದಾಗ ದೇವೇಂದ್ರನು ತನ್ನ ಮಗಳಾದ ದೇವಸೇನೆಯನ್ನು ಕುಮಾರಸ್ವಾಮಿಗೆ ಕುಮಾರಧಾರ ತೀರ್ಥದ ತಟದಲ್ಲಿ ಮಾರ್ಗಶಿರ ಶುದ್ಧ ಷಷ್ಠಿಯ ದಿನ ಪಾಣಿಗ್ರಹಣ ಮಾಡಿದನು. ಅದೇ ವೇಳೆ ಅಲ್ಲಿಯೇ ತಪಸ್ಸನ್ನಾಚರಿಸುತ್ತಿದ್ದ ನಾಗರಾಜನಾದ ವಾಸುಕಿಯ ಪ್ರಾರ್ಥನೆಯನ್ನು ಮನ್ನಿಸಿ ತಾನು ದೇವಸೇನಾ ಸಮೇತನಾಗಿ ಒಂದಂಶದಿಂದ ಅವನಲ್ಲಿ ನಿತ್ಯ ಸನ್ನಿಹಿತನಾಗಿ ಈ ಕ್ಷೇತ್ರದಲ್ಲಿ ನೆಲೆಸುವುದಾಗಿ ವಾಸುಕಿಯನ್ನು ಹರಸುತ್ತಾನೆ.
ಪರಶುರಾಮ ಸೃಷ್ಠಿಯ ಸಪ್ತ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪುರಾಣ, ಇತಿಹಾಸ ಕಾಲಗಳಿಂದಲೂ ನಾಗಾರಾಧನೆಗೆ ಪ್ರಸಿದ್ಧಿಯಾಗಿದ್ದು, ವಾಸುಕೀ ಸನ್ನಿಹಿತ ಶ್ರೀ ಸುಬ್ರಹ್ಮಣ್ಯ ದೇವರು ಭಕ್ತಾಭೀಷ್ಟ ಪ್ರದಾಯಕನಾಗಿ ಈ ಕ್ಷೇತ್ರದ ಅಧಿದೇವತೆಯಾಗಿ ನೆಲೆಸಿರುತ್ತಾನೆ. ಗುಪ್ತ ಕ್ಷೇತ್ರವೆಂಬುವುದಾಗಿಯೂ ಈ ಕ್ಷೇತ್ರವನ್ನು ಕರೆಯುತ್ತಾರೆ. ಮೃತ್ತಿಕಾ ಪ್ರಸಾದ ಇಲ್ಲಿನ ಶ್ರೇಷ್ಠ ಪ್ರಸಾದವಾಗಿದೆ. ಪವಿತ್ರ ಕುಮಾರಧಾರ ತೀರ್ಥ ಸ್ನಾನದಿಂದ ಮತ್ತು ಮಡೆಸ್ನಾನದಿಂದ ಕುಷ್ಠ ರೋಗದಂತಹ ಭಯಾನಕ ರೋಗಗಳೂ, ಧರ್ಮ ವ್ಯಾಧಿಗಳೂ ಶಮನವಾಗುವುದೆಂಬುದು ಭಕ್ತರ ಅಪಾರ ನಂಬಿಕೆ. ಶ್ರೀ ದೇವರಿಗೆ ಅನ್ನದಾನ ಸುಬ್ಬಪ್ಪನೆಂಬ ನಾಮಾಭಿದಾನವಿದ್ದು, ಶ್ರೀ ಕ್ಷೇತ್ರದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳಿಗೆ ನಿತ್ಯ ಅನ್ನಸಂತರ್ಪಣೆ ನಡೆಯುತ್ತಿದೆ. ಸರ್ಪದೋಷದಿಂದ ಬರುವಂತಹ ಸಂತಾನ ಹೀನತೆ, ಚರ್ಮ ವ್ಯಾಧಿ, ದೃಷ್ಠಿ ಮಾಂದ್ಯ, ಭೂಮಿ ದೋಷವೇ ಮೊದಲಾದ ಜ್ವಲಂತ ಸಮಸ್ಯೆಗಳಿಗೆ ಪರಿಹಾರವಾಗಿ ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ ಇತ್ಯಾದಿ ಪ್ರಮುಖ ಹರಕೆ ಸೇವೆಗಳನ್ನು ಭಕ್ತರು ಇಲ್ಲಿ ನಡೆಸಿ ಕೃತಾರ್ಥರಾಗುತ್ತಾರೆ. ಜನ್ಮ ಜನ್ಮಾಂತರದ ದುರಿತಗಳ ನಾಶನಾದ ಶ್ರೀ ಸುಬ್ರಹ್ಮಣ್ಯ ದೇವರು ಭಕ್ತಾದಿಗಳ ಶ್ರದ್ಧಾ-ಭಕ್ತಿ ಪೂರ್ವಕ ಸೇವಾ ಕೈಂಕರ್ಯಗಳನ್ನು ಸ್ವೀಕರಿಸಿ ಇಷ್ಟಾರ್ಥಗಳನ್ನು ಕರುಣಿಸಿ ಪೊರೆಯುವ ಕಲಿಯುಗ ಪ್ರತ್ಯಕ್ಷ ದೇವರೆನಿಸಿಕೊಂಡಿದ್ದಾನೆ.
ಇಲ್ಲಿನ ಸರ್ಪ ಸ೦ಸ್ಕಾರ ಬಹಳ ಶ್ರೇಷ್ಟ ಮತ್ತು ಪ್ರಸಿದ್ಢ. ಸರ್ಪ ದೋಷ ಇರುವವರು ಇಲ್ಲಿಗೆ ಬ೦ದು, ಸರ್ಪ ಸ೦ಸ್ಕಾರ ಮತ್ತು ನಾಗ ಪ್ರತಿಷ್ಟೆ ನೆರವೇರಿಸಿ ದೋಷ ಮುಕ್ತರಾಗುತ್ತಾರೆ. ಇತ್ತೀಚೆಗೆ ಇಲ್ಲಿಗೆ ಭೇಟಿ ನೀಡಿ ಈ ಕಾರ್ಯಗಳನ್ನು ನೆರವೇರಿಸಿದ ವಿಖ್ಯಾತರಲ್ಲಿ ಸಚಿನ್ ತೆ೦ಡೂಲ್ಕರ್ ಮತ್ತು ಹೇಮಮಾಲಿನಿ ಸೇರಿದ್ದಾರೆ.
ಜಾತಕಗಳಲ್ಲಿನ ಸರ್ಪದೋಷ ಅಥವಾ ನಾಗದೋಷ, ಕಾಳಸರ್ಪದೋಷ ಇತ್ಯಾದಿ ದೋಷಗಳ ಕಾರಣದಿಂದ ಅನಾರೋಗ್ಯ, ತಡವಿವಾಹ, ವೈವಾಹಿಕ ಸುಖಭಂಗ, ಪುತ್ರಹೀನತೆ (ಗಂಡು ಸಂತಾನ ಇಲ್ಲದಿರುವುದು),ಸಂತಾನಹೀನತೆ (ಮಕ್ಕಳೇ ಆಗದಿರುವುದು,ಉದ್ಯೋಗದಲ್ಲಿ ಅಸಮಾಧಾನ,ಇತ್ಯಾದಿ ತೊಂದರೆಗಳನ್ನು ಅನುಭವಿಸುತ್ತಿರುವವರ ಈ ಮೇಲೆ ಹೇಳಲಾದ ದೋಷಗಳಿಗೆ ಪರಿಹಾರ ಮಾಡಿಸಲು ಕರ್ನಾಟಕದಲ್ಲಿರುವ ಅತ್ಯಂತ ಪವಿತ್ರವಾದ ನಾಗರೂಪದಲ್ಲಿರುವ ಸುಬ್ರಹ್ಮಣ್ಯಸ್ವಾಮಿಯ ದೇವಸ್ಥಾನವಿರುವ ಕ್ಷೇತ್ರ ಎಂದರೆ ಈ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ. ಈ ಕ್ಷೇತ್ರಕ್ಕೆ ಪ್ರಪಂಚದ ನಾನಾ ಮೂಲೆಗಳಿಂದ ಭಕ್ತರು ಬಂದು ಸರ್ಪಸಂಸ್ಕಾರ, ನಾಗಪ್ರತಿಷ್ಠೆ, ಆಶ್ಲೇಷಬಲಿ, ಇತ್ಯಾದಿ ಸೇವೆ ಸಲ್ಲಿಸಿ ದೋಷಮುಕ್ತರಾಗಿ ಸುಖಜೀವನ ನಡೆಸುತ್ತಿದ್ದಾರೆ. ಕುಜದೋಷವಿರುವವರೂ ಸಹಾ ಇಲ್ಲಿ ಪರಿಹಾರ ಕಾಣುತ್ತಾರೆ. ಕಾರ್ತಿಕೇಯ, ಸುಬ್ರಹ್ಮಣ್ಯ ಎಂದೆಲ್ಲಾ ಕರೆಸಿಕೊಳ್ಳುವ ಈ ದೇವನು ಕ್ಷೀರಪ್ರಿಯನು. ಭಕ್ತರ ದೋಷಗಳನ್ನು ಪರಿಹಾರ ಮಾಡುವ ಸಲುವಾಗಿಯೇ ಈ ಕ್ಷೇತ್ರದಲ್ಲಿ ನೆಲೆಸಿದ್ದಾನೆ ಎಂದರೆ ತಪ್ಪಾಗಲಾರದು.